
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯಿಂದ ನಾಳೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ದೇವನಹಳ್ಳಿ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮಿತಿ ಪದಾಧಿಕಾರಿಗಳು, ನಾಳೆ ಚನ್ನರಾಯಪಟ್ಟಣ ಹಾಗೂ ಬೆಂಗಳೂರು ಫ್ರೀಡಂ ಪಾರ್ಕ್ ಎರಡೂ ಸ್ಥಳದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ. ಸರಕಾರ ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಬಾರದು. ರೈತರ ಫಲವತ್ತಾದ ಭೂಮಿಯನ್ನು ರೈತರಿಗೆ ಉಳಿಸಿಕೊಡಬೇಕು ಎಂದು ಆಗ್ರಹಪಡಿಸಿದರು.
ನಾಳೆ ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಭೂಸ್ವಾಧೀನವನ್ನು ಕೈಬಿಡುವ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸರಕಾರ ಈ ನಿರ್ಧಾರ ಕೈಗೊಳ್ಳಲಿಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.