ಸಮಗ್ರ ಸುದ್ದಿ

ರಾಜ್ಯದ ಶ್ರೀಮಂತ ಪಂಚಾಯ್ತಿಯ ಅದ್ಧೂರಿ ಕಚೇರಿ ಲೋಕಾರ್ಪಣೆ! ಹೇಗಿದೆ ನೋಡಿ!

Share It

4.19 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಗ್ರಾಮ ಸೌಧ ಕಟ್ಟಡ

ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಿ

ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮಪಂಚಾಯಿತಿಯ ನೂತನ ಗ್ರಾಮ ಸೌಧ ಕಟ್ಟಡವನ್ನು ಇಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹಚ್ ಮುನಿಯಪ್ಪ ಅವರು ಲೋಕಾರ್ಪಣೆಗೊಳಿಸಿ ನಂತರ ಮಾತನಾಡಿದರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿಯು ಇಡೀ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಿ ಎನಿಸಿಕೊಂಡಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಹೆಚ್ಚು ತೆರಿಗೆ ಸಂಗ್ರಹ ಈ ಪಂಚಾಯಿತಿಗೆ ಬರುತ್ತಿದೆ. ಹಿಂದಿನ ಅಧ್ಯಕ್ಷರು, ಹಾಲಿ ಅಧ್ಯಕ್ಷರು, ಸದಸ್ಯರುಗಳು ತೆರಿಗೆಯ ಹಣ ಸದುಪಯೋಗ ಪಡೆದುಕೊಂಡು ಒಳ್ಳೆಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದೀರಿ. ಅಭಿವೃದ್ಧಿ ಕಾರ್ಯಗಳ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಕೊಟ್ಟು ಶಾಲೆ ಅಭಿವೃದ್ಧಿ ಪಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಿ ಎಂದರು.

ಗ್ಯಾರಂಟಿ ಯೋಜನೆ ಜಾರಿಗೆ ತಂದ ನಂತರ ತಲಾದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ತೆರಿಗೆ ಪಾವತಿ ಮಾಡುವುದರಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿ ಇದ್ದರೆ ಕರ್ನಾಟಕ ಎರಡನೇ ರಾಜ್ಯ. ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಪೋಡಿ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ರೈತರ ಜಮೀನುಗಳಿಗೆ ರಸ್ತೆ, ಸ್ಮಶಾನಕ್ಕೆ ರಸ್ತೆ ಸಂಪರ್ಕ, ಬಡವರಿಗೆ ಸೈಟ್, ಮನೆ ನೀಡುವುದು ಮೊದಲ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತಿದೆ ಎಂದರು.

ಮೂರು ನಾಲ್ಕು ತಿಂಗಳಲ್ಲಿ 2500 ಸೈಟ್ ಎಲ್ಲಾ ವರ್ಗದ ಬಡವರಿಗೆ ನೀಡಲಾಗುವುದು. ಹಾಗೆ ಮನೆ ಇಲ್ಲದವರಿಗೆ ಮನೆ ನೀಡಲಾಗುತ್ತಿದೆ. ಪ್ರಣಾಳಿಕೆಯಂತೇ ರೈತರ ಪರ , ಬಡವರ ಪರ ಕೆಲಸ ಮಾಡಲಾಗುತ್ತಿದೆ ಎಂದರು.

ಬಳಿಕ 50 ಲಕ್ಷ ವೆಚ್ಚದಲ್ಲಿ ಮಹಿಳಾ ಕೌಶಲ್ಯಾಭಿವೃದ್ಧಿ ಭವನ, 1.5 ಕೋಟಿ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಅರಿವು ಕೇಂದ್ರ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಇತರೆ ಸರ್ಕಾರಿ ಕಟ್ಟಡಗಳ ಸಂಕೀರ್ಣ. 21 ಲಕ್ಷ ವೆಚ್ಚದಲ್ಲಿ ಚಿಕ್ಕಸಣ್ಣೆ ಗ್ರಾಮದ ಅಂಗನವಾಡಿ ಕೇಂದ್ರ, 54.50 ಲಕ್ಷ ವೆಚ್ಚದಲ್ಲಿ ಬೈಚಾಪುರ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ, 25 ಲಕ್ಷ ವೆಚ್ಚದಲ್ಲಿ ಸ್ವಚ್ಛ ಸಂಕೀರ್ಣ ಘನ ಮತ್ತು ದ್ರವತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕದ ನೂತನ ಕಟ್ಟಡಗಳ ಉದ್ಘಾಟನೆಯನ್ನು ಸಚಿವರು ನೆರವೇರಿಸಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ ಮಾತನಾಡಿ ಗ್ಯಾರಂಟಿ ಯೋಜನೆಗಳಿಂದ 7000-8000 ರೂ. ಪ್ರತಿ ತಿಂಗಳು ಕುಟುಂಬಕ್ಕೆ ಸೇರುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ಗ್ಯಾರಂಟಿ ಸಹಕಾರಿ ಆಗಿದೆ. ಎಲ್ಲಾ ವರ್ಗದ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಉಸ್ತುವಾರಿ ಸಚಿವರಿಂದ ಬಹಳಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ದೇವನಹಳ್ಳಿ ಹಾಗೂ ವಿಜಯಪುರ ಟೌನ್ ನಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿದೆ. ಸುಮಾರು 50 ಕೋಟಿ ರೂ ವೆಚ್ಚದ ಕಾಮಗಾರಿಗಳು ದೇವನಹಳ್ಳಿ ತಾಲ್ಲೂಕಿನಾದ್ಯಂತ ನಡೆಯುತ್ತಿವೆ ಎಂದರು.

ನಿವೇಶನ ಹಂಚಿಕೆ, ಸ್ಮಶಾನಕ್ಕೆ ಜಾಗ,ಪಶು ಆಸ್ಪತ್ರೆ ನಿರ್ಮಿಸಲು ಗ್ರಾಮಸ್ಥರು ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಣ್ಣೇಶ್ವರ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಉಮಾ ಜಿ ಮುನಿರಾಜು, ಉಪಾಧ್ಯಕ್ಷ ಮುನಿರಾಜಪ್ಪ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಸಿ ಮಂಜುನಾಥ, ತಹಶೀಲ್ದಾರ್ ಅನಿಲ್ ಕುಮಾರ್, ಇಒ ಶ್ರೀನಾಥ್ ಗೌಡ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳಿಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

You cannot copy content of this page