ಸಮಗ್ರ ಸುದ್ದಿ

ಘಾಟಿ ಕ್ಷೇತ್ರ ಅಭಿವೃದ್ಧಿಗೆ 29 ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ

Share It

16 ಕೋಟಿ ವೆಚ್ಚದಲ್ಲಿ ದಾಸೋಹ ಭವನ ನಿರ್ಮಾಣ:ಸಚಿವ ರಾಮಲಿಂಗಾರೆಡ್ಡಿ

ಡಿಸೆಂಬರ್ 25 ಕ್ಕೆ ಬ್ರಹ್ಮ ರಥೋತ್ಸವ

ಶ್ರೀ ಘಾಟಿ ಕ್ಷೇತ್ರದಲ್ಲಿ ಹದಿನಾರು ಕೋಟಿ ರೂ. ವೆಚ್ಚದಲ್ಲಿ 2,000 ಭಕ್ತಾದಿಗಳು ಒಂದೇ ಸಮಯದಲ್ಲಿ ಕುಳಿತು ಊಟ ಮಾಡುವಂತಹ ದಾಸೋಹ ಭವನ ನಿರ್ಮಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಕ್ಷೇತ್ರ ಸಭಾಂಗಣದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪ್ರತಿ ವರ್ಷ ಸುಮಾರು 25 ಲಕ್ಷಕ್ಕಿಂತ ಹೆಚ್ಚಿನ ಭಕ್ತರು ಬರುತ್ತಾರೆ. ಸುಸಜ್ಜಿತ ಅನ್ನ ಸಂತರ್ಪಣೆ ಸೌಲಭ್ಯ ಭಕ್ತರಿಗೆ ಒದಗಿಸುವುದು ಮುಖ್ಯ. ಹಾಗಾಗಿ ದಾಸೋಹ ಭವನ ನಿರ್ಮಿಸಲಾಗುತ್ತಿದ್ದು ದಾಸೋಹ ಭವನ ಮುಂಭಾಗವು ಹೊಯ್ಸಳ ಶೈಲಿಯಿಂರ ಕೂಡಿರಲಿದೆ ಎಂದರು.

ರಥೋತ್ಸವ ಸಂದರ್ಭದಲ್ಲಿ ಭಕ್ತಾದಿಗಳಿಗೆ ಅನುಕೂಲವಾಗುವಂತೆ ರಥ ಬೀದಿ ನಿರ್ಮಿಸಲಾಗುವುದು. ದೇವಾಲಯದ ಸುತ್ತಲೂ ಕಾಂಕ್ರೀಟ್ ರಸ್ತೆ, ಶೌಚಾಲಯ ವ್ಯವಸ್ಥೆ ಹಾಗೂ ಒಂದೂವರೆ ಕೋಟಿ ವೆಚ್ಚದಲ್ಲಿ ಅತಿಥಿ ಗೃಹವನ್ನು ಅಭಿವೃದ್ಧಿ ಮಾಡಲಾಗುತ್ತದೆ. ರಸ್ತೆ ಅಭಿವೃದ್ಧಿ ಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಶುದ್ಧ ತುಪ್ಪದಿಂದ ಮಾಡಿದ ಲಡ್ಡುವನ್ನು ಪ್ರಸಾದವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಒಟ್ಟಾರೆ ಇಂದು ನಡೆದ ಸಭೆಯಲ್ಲಿ 29 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೈಗೊಳ್ಳಲು ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಡಿಸೆಂಬರ್ 25 ಕ್ಕೆ ಬ್ರಹ್ಮರಥೋತ್ಸವ
ಶ್ರೀ ಘಾಟಿ ಸುಬ್ರಮಣ್ಯರವರ ಬ್ರಹ್ಮರಥೋತ್ಸವ ಡಿಸೆಂಬರ್ 25 ರಂದು ನಡೆಯಲಿದೆ. ಈ ಬಾರಿ ವಿಶೇಷವಾಗಿ ಪುಷ್ಪಲಂಕಾರ ದೀಪ ಅಲಂಕಾರಗಳಿರುತ್ತದೆ. ಭಕ್ತಾದಿಗಳ ಅನುಕೂಲಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕ್ಯೂಲೈನ್ ವ್ಯವಸ್ಥೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗುವುದು.

ಸುಂಕ ರಹಿತ ಜಾತ್ರೆ
ಈ ಬಾರಿಯ ಘಾಟಿ ಜಾತ್ರೆಯಲ್ಲಿ ಜಾನುವಾರುಗಳಿಗೆ ಹಾಗೂ ಬರುವಂತಹ ಭಕ್ತಾದಿಗಳ ವಾಹನಗಳಿಗೆ ಸುಂಕ ಇರುವುದಿಲ್ಲ. ಹಿರಿಯ ನಾಗರಿಕರಿಗೆ, ವಿಶೇಷ ಚೇತನರಿಗೆ, ಗರ್ಭಿಣಿ ಬಾಣಂತಿಯರಿಗೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು.

ಡಿ.10 ರಿಂದ 18 ವರೆಗೆ ರಾಸುಗಳ ಜಾತ್ರೆ
ಡಿಸೆಂಬರ್ 10 ರಿಂದ 18 ರವರೆಗೆ ರಾಸುಗಳ ಜಾತ್ರೆ ನಡೆಯಲಿದೆ ರಾಸುಗಳ ಜಾತ್ರೆ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಕಲ್ಪಿಸಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ ಘಾಟಿ ಕ್ಷೇತ್ರ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲಾಗಿದೆ. ಕ್ಷೇತ್ರ ಅಭಿವೃದ್ಧಿಗೆ 100 ಎಕರೆ ಜಾಗದ ಅವಶ್ಯಕತೆ ಇದೆ. ಸದ್ಯಕ್ಕೆ 50 ಎಕರೆ ಜಾಗ ಬೇಕಾಗಿದ್ದು 20 ಎಕರೆ ಸರ್ಕಾರಿ ಜಮೀನು ಇದ್ದು, ಇನ್ನು 30 ಎಕರೆ ಜಾಗ ಹುಡುಕಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಘಾಟಿ ಕ್ಷೇತ್ರದಲ್ಲಿ ಸುಸಜ್ಜಿತ ಅನ್ನಸಂತರ್ಪಣೆ ಕಟ್ಟಡ, ಮಾಕಳಿಯಿಂದ ಕಂಟನಕುಂಟೆ ಮಾರ್ಗವಾಗಿ ಘಾಟಿಯ ವರೆಗೆ ರಸ್ತೆ ಅಭಿವೃದ್ಧಿ, ಅತಿಥಿ ಗೃಹ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಭಕ್ತಾದಿಗಳ ಹಿತ ದೃಷ್ಟಿಯಿಂದ ಸುಂಕ ರಹಿತ ಜಾತ್ರೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಮುಜರಾಯಿ ಇಲಾಖೆ ಆಯುಕ್ತರಾದ ಶರತ್, ಜಿಲ್ಲಾಧಿಕಾರಿ ಎಬಿ ಬಸವರಾಜು, ಎಡಿಸಿ ಸೈಯಿದಾ ಆಯಿಷಾ, ಘಾಟಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು, ಸಮಿತಿ ಸದಸ್ಯರು, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

You cannot copy content of this page