ಸಮಗ್ರ ಸುದ್ದಿ

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ

Share It

ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ:ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಕಂಪನಿ ಮುಖ್ಯಸ್ಥರಿಗೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದ ನಂತರ ಕೈಗಾರಿಕಾ ಪ್ರದೇಶ ವ್ಯಾಪ್ತಿ ಹೆಚ್ಚಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ಸುಮಾರು 10000 ಎಕರೆ ಕೈಗಾರಿಕಾ ಪ್ರದೇಶ ಇದೆ. ಹಲವಾರು ಕುಟುಂಬಗಳು ಕೈಗಾರಿಕೆಗಳಿಗೆ ಭೂಮಿ ನೀಡಿದ್ದಾರೆ. ಅಂತಹ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಸಿಗಬೇಕು ಎನ್ನುವುದು ನನ್ನ ಅಭಿಪ್ರಾಯ.

ಸರ್ಕಾರವು ಕಂಪನಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಸಹಕಾರ ನೀಡುತ್ತಾ ಬಂದಿದೆ. ಕಂಪನಿಗಳು ಕೂಡ ಅದೇ ರೀತಿ ಸರ್ಕಾರದ ನೀತಿ ನಿಯಮಗಳನ್ನು ಪಾಲಿಸಬೇಕು. ಸಾಕಷ್ಟು ಕುಟುಂಬಗಳಲ್ಲಿ ಸ್ಥಳೀಯ ಅರ್ಹ ಅಭ್ಯರ್ಥಿಗಳಿಗೆ ಇದ್ದಾರೆ. ಅಂತಹವರ ಆಯ್ಕೆ ಮೊದಲಿರಲಿ ಎಂದರು.

ಹತ್ತು ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ ಇರುವ ಕಂಪನಿಗಳು ಸ್ವಂತ ತರಬೇತಿ ಸಂಸ್ಥೆ ಪ್ರಾರಂಭಿಸಿ ಕೌಶಲ್ಯಾಧರಿತ ತರಬೇತಿ ನೀಡಿ ಆಯ್ಕೆ ಮಾಡಿಕೊಂಡರೆ ಉತ್ತಮ. ಇನ್ನುಳಿದಂತೆ ಸರ್ಕಾರದ ವತಿಯಿಂದ ವಿವಿಧ ಸರ್ಕಾರಿ ತರಬೇತಿ ಸಂಸ್ಥೆಗಳ ಮೂಲಕ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು. ಸ್ಥಳೀಯರಿಗೆ ಉದ್ಯೋಗಾವಕಾಶ ನೀಡುತ್ತಿಲ್ಲ ಎಂದು ಹಲವರು ತಿಳಿಸಿದ್ದಾರೆ ಈ ರೀತಿಯ ಘಟನೆಗಳು ಆಗಬಾರದು. ಯಾವ ಕಂಪನಿಗಳಲ್ಲಿ ಸ್ಥಳೀಯರಿಗೆ ಎಷ್ಟು ಉದ್ಯೋಗ ಲಭಿಸಿದೆ, ಕಂಪನಿಗಳಲ್ಲಿ ಎಷ್ಟು ಉದ್ಯೋಗ ಖಾಲಿ ಇದೆ, ಎಂತಹ ಅಭ್ಯರ್ಥಿಗಳ ಅವಶ್ಯಕತೆ ಇದೆ ಎಂಬುದರ ಬಗ್ಗೆ ಕಂಪನಿಗಳಿಂದ ಮಾಹಿತಿ ಪಡೆದು ಸಂಪೂರ್ಣ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು.

ಸಿಎಸ್ಆರ್ ಅನುದಾನದಡಿ ಶಾಲೆಗಳ ಅಭಿವೃದ್ಧಿಗೆ ಮೊದಲ ಪ್ರಾಶಸ್ತ್ಯ
ಕಂಪನಿಗಳು ತಮ್ಮ ಆರ್ಥಿಕ ವಹಿವಾಟಿನಲ್ಲಿ ಶೇಕಡ 02% ರಷ್ಟು ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್) ಹಣವನ್ನು ಕಡ್ಡಾಯವಾಗಿ ವಿವಿಧ ಸಾಮಾಜಿಕ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಮಕ್ಕಳ ಶಿಕ್ಷಣ ಮುಂದಿನ ಪೀಳಿಗೆಗೆ ಸಹಕಾರ ಆಗಲಿದೆ. ಗುಣಮಟ್ಟದ ಶಿಕ್ಷಣಕ್ಕೆ ನಾವು ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸಿಎಸ್ಆರ್ ಅನುದಾನವನ್ನು ಶಾಲೆಗಳ ಅಭಿವೃದ್ಧಿಗೆ ಬಳಸಲು ಮೊದಲ ಪ್ರಾಶಸ್ತ್ಯ ನೀಡಿ ಎಂದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಎಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು, ತಾಲ್ಲೂಕು ಕೈಗಾರಿಕಾ ಸಂಘದ ಅಧ್ಯಕ್ಷರು, ಕಂಪನಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

You cannot copy content of this page